ಧಾರವಾಡ, ಮೇ 30 (ನ್ಯೂ ವಿಜಯ ನ್ಯೂಸ್): ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಮಲ್ಲನಗೌಡ ಸೋಮನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮುಂಗಾರು ಬಿತ್ತನೆಗೆ ಅಗತ್ಯವಿರುವ ಬೀಜಗಳ ಲಭ್ಯತೆ ಹಾಗೂ ಸಹಾಯಧನದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ವತಿಯಿಂದ ಹನಿ ನೀರಾವರಿ, ರಾಷ್ಟ್ರೀಯ ತೋಟಗಾರಿಕಾ ಮಿಷನ್ ಹಾಗೂ ಯಾಂತ್ರೀಕರಣ ಯೋಜನೆಯಡಿ ಸ್ಪ್ರೇಯರ್, ಮಿನಿ ಟ್ರ್ಯಾಕ್ಟರ್, ಟ್ರೇಲರ್ ಹಾಗೂ ರೋಟಾವೇಟರ್ಗಳನ್ನು ಸಹಾಯಧನದಡಿ ವಿತರಿಸಲಾಗುತ್ತಿದೆ ಎಂದು ತಿಳಿಸಲಾಯಿತು.
ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ, ಸಣ್ಣ ನೀರಾವರಿ, ಕೌಶಲ್ಯಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳು ಹಾಗೂ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ವಿವರಿಸಿದರು.
ಹೆಸ್ಕಾಂ ಅಧಿಕಾರಿಗಳು ರೈತರ ಪಂಪ್ಸೆಟ್ಗಳಿಗೆ 7 ಗಂಟೆಗಳ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ರಸ್ತೆ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಬಾಡಿನ, ಜಿಲ್ಲಾ ಖಜಾಂಜಿ ಬಸಪ್ಪ ಗುಡೆಣ್ಣವರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment