ಹುಬ್ಬಳ್ಳಿ: ಹುಬ್ಬಳ್ಳಿಯ ವಿರುಪಾಪುರ ಓಣಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಯೋಜನಾ ಕೊರತೆಯಿಂದಾಗಿ ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸಿಸಿ ರಸ್ತೆ ಹಾಳಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಕೆಲ ಸಮಯದ ಹಿಂದೆ ಪಾಲಿಕೆ ವತಿಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ ಇದೀಗ ಚರಂಡಿ ಸಮಸ್ಯೆ ಪರಿಹರಿಸುವ ನೆಪದಲ್ಲಿ ಅದೇ ರಸ್ತೆಯನ್ನು ಮತ್ತೆ ಅಗೆದು ಹೊಸ ಚರಂಡಿ ಮಾರ್ಗ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ.
“ರಸ್ತೆ ನಿರ್ಮಾಣಕ್ಕೂ ಮುನ್ನವೇ ಒಳಚರಂಡಿ ವ್ಯವಸ್ಥೆಯನ್ನು ಸರಿಯಾಗಿ ಪೂರ್ಣಗೊಳಿಸಿದ್ದರೆ ಜನರ ತೆರಿಗೆ ಹಣ ವ್ಯರ್ಥವಾಗುತ್ತಿರಲಿಲ್ಲ. ಯೋಜನೆಯ ಕೊರತೆಯಿಂದ ಮತ್ತೆ ಒಳ್ಳೆಯ ರಸ್ತೆಯನ್ನು ಹಾಳು ಮಾಡಲಾಗುತ್ತಿದೆ” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಲ್ಲಿ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ಜನರ ಹಣ ವ್ಯರ್ಥವಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಮುಂದಿನ ದಿನಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳನ್ನು ಸೂಕ್ತ ಯೋಜನೆಯೊಂದಿಗೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ನ್ಯೂ ವಿಜಯ ನ್ಯೂಸ್
Post a Comment