ಕೊಪ್ಪಳ: ತುಂಗಭದ್ರಾ ಜಲಾಶಯದ ಸುರಕ್ಷತೆ ಹಾಗೂ ನದಿ ಪಾತ್ರದ ರೈತರ ಹಿತ ಕಾಪಾಡುವ ಉದ್ದೇಶದಿಂದ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಒಗ್ಗೂಡಿ ಐತಿಹಾಸಿಕ ನಿರ್ಧಾರ ಕೈಗೊಂಡಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ನಡೆದ ತುಂಗಭದ್ರಾ ಅಣೆಕಟ್ಟಿನ 33 ನೂತನ ಸ್ಪಿಲ್ವೇ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂರು ರಾಜ್ಯಗಳ ಸಹಕಾರದಿಂದ ಅಣೆಕಟ್ಟಿನ ಭವಿಷ್ಯ ರಕ್ಷಣೆ ಮತ್ತು ರೈತರ ಹಿತಾಸಕ್ತಿ ಕಾಪಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ಬಾರಿ ಅಣೆಕಟ್ಟಿನ 19ನೇ ಗೇಟ್ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯ ಸಂದರ್ಭದಲ್ಲಿ ತಕ್ಷಣ ಕ್ರಮ ಕೈಗೊಂಡು ತಜ್ಞರ ಸಲಹೆಯಂತೆ ಗೇಟ್ ಬದಲಾವಣೆ ಮಾಡಲಾಗಿತ್ತು. ಇದರಿಂದ ಅಪಾರ ಪ್ರಮಾಣದ ನೀರು ಹಾಗೂ ರೈತರ ಬೆಳೆಗಳನ್ನು ರಕ್ಷಿಸಲು ಸಾಧ್ಯವಾಯಿತು ಎಂದು ಅವರು ಸ್ಮರಿಸಿದರು.
ಮೂರು ರಾಜ್ಯಗಳ ಒಗ್ಗಟ್ಟಿನಿಂದ ಹೊಸ ಅಧ್ಯಾಯ
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ತುಂಗಭದ್ರಾ ಜಲಾಶಯದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ನವಿಲಿ ಸಮತೋಲನ ಜಲಾಶಯ, ಹೂಳೆತ್ತುವಿಕೆ ಸೇರಿದಂತೆ ನೀರಿನ ಸಂರಕ್ಷಣೆಗಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ರೈತರ ಬದುಕು ಉಳಿಸುವುದು ನಮ್ಮ ಆದ್ಯತೆ
“ರೈತನಿಗೆ ಸಂಬಳವಿಲ್ಲ, ಬಡ್ತಿ ಇಲ್ಲ, ನಿವೃತ್ತಿಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕು ಹಾಗೂ ಈ ಭಾಗದ ಭತ್ತದ ಕಣಜವನ್ನು ಕಾಪಾಡುವುದು ನಮ್ಮ ಕರ್ತವ್ಯ” ಎಂದು ಅವರು ಹೇಳಿದರು.
ತುಂಗಭದ್ರಾ ಜಲಾಶಯ ನಿರ್ಮಾಣದ ಇತಿಹಾಸವನ್ನು ನೆನಪಿಸಿಕೊಂಡ ಅವರು, 1860ರಲ್ಲಿ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ಈ ಯೋಜನೆಯ ಕಲ್ಪನೆ ನೀಡಿದ್ದು, 1949ರಲ್ಲಿ ಕಾಮಗಾರಿ ಆರಂಭಗೊಂಡು ಅನೇಕ ಮಹನೀಯರ ಶ್ರಮದಿಂದ ಈ ಅಣೆಕಟ್ಟು ನಿರ್ಮಾಣಗೊಂಡಿದೆ ಎಂದರು.
ಗೋದಾವರಿ–ಕಾವೇರಿ ಜೋಡಣೆಗೆ ರಾಷ್ಟ್ರೀಯ ಯೋಜನೆ ಸ್ಥಾನ ನೀಡಿ: ಚಂದ್ರಬಾಬು ನಾಯ್ಡು
ಕಾರ್ಯಕ್ರಮದಲ್ಲಿ ಮಾತನಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದಕ್ಷಿಣ ಭಾರತದ ನೀರಿನ ಸಮಸ್ಯೆ ಪರಿಹಾರಕ್ಕೆ ಗೋದಾವರಿ–ಕಾವೇರಿ ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಲಕ್ಷಾಂತರ ರೈತರಿಗೆ ಅನುಕೂಲ: ರೇವಂತ್ ರೆಡ್ಡಿ
ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಾತನಾಡಿ, ಬಳ್ಳಾರಿ, ಅನಂತಪುರ, ಕರ್ನೂಲ್ ಸೇರಿದಂತೆ ಜಲಾನಯನ ಪ್ರದೇಶದ ರೈತರ ಹಲವು ದಶಕಗಳ ಸಮಸ್ಯೆಗಳಿಗೆ ಈ 33 ಗೇಟ್ಗಳ ಆಧುನೀಕರಣ ಪರಿಹಾರ ನೀಡಲಿದೆ. ಲಕ್ಷಾಂತರ ರೈತರಿಗೆ ಇದು ದೊಡ್ಡ ಸಹಾಯವಾಗಲಿದೆ ಎಂದು ಹೇಳಿದರು.
ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್ಗಳ ಲೋಕಾರ್ಪಣೆ ದಕ್ಷಿಣ ಭಾರತದ ನೀರಾವರಿ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದೆ.
Post a Comment