ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹುಬ್ಬಳ್ಳಿಯ ವಿಘ್ನೇಶ್ವರ ಶಾಲಾ ಮೈದಾನದಲ್ಲಿ ‘ಹುಬ್ಬಳ್ಳಿಯ ಹೆಮ್ಮೆ’ ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ 540 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ, ಅವರ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಧ್ಯಯನದ ಮೂಲಕ ಉತ್ತಮ ಫಲಿತಾಂಶ ಪಡೆದು ಹುಬ್ಬಳ್ಳಿಗೆ ಹೆಮ್ಮೆ ತಂದಿದ್ದಾರೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಗಣ್ಯರು, “ಇಂದಿನ ವಿದ್ಯಾರ್ಥಿಗಳೇ ನಾಳೆಯ ಸಮಾಜದ ಶಕ್ತಿಯಾಗಿದ್ದು, ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಬಾಲ ವಿಕಾಸ ಅಕಾಡೆಮಿಯ ಸದಸ್ಯೆ ಮೇಘನಾ ಹಿರೇಮಠ, ಪ್ರೇಮನಾಥ್ ಚಿಕ್ಕತುಂಬಳ, ಅಡಿವೇಶ್ ಇಟಗಿ, ವೀರೇಶ್ ಕಡಕೊಳಮಠ, ಪ್ರಕಾಶ್ ಹಳಿಯಾಳ, ಸಂಗಮೇಶ್ ಗೌರಕ್ಕನವರ, ಅಜ್ಜಪ್ಪ ರಾಯಾಪುರ, ಜಗದೀಶ್ ನೆಲ್ಗುಡ್, ರಾಜೇಂದ್ರ ಪಾಟೀಲ್ ಸೇರಿದಂತೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಲಾಯಿತು.
Post a Comment