ಒತ್ತಡ ಮುಕ್ತ ಜೀವನಕ್ಕೆ ಯೋಗ ಅತ್ಯವಶ್ಯ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಎನ್.ವಿ. ವಿಜಯ್
ಧಾರವಾಡ: ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದ್ದು, ಒತ್ತಡ ಮುಕ್ತ ಕಾರ್ಯ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ್ ಹೇಳಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಧಾರವಾಡ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರಂತರ ಯೋಗಾಭ್ಯಾಸದಿಂದ ಮನಸ್ಸಿನ ಏಕಾಗ್ರತೆ ಹೆಚ್ಚುವುದರ ಜೊತೆಗೆ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಯೋಗದ ಮಹತ್ವ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರುಗಳು, ವಕೀಲರ ಸಂಘದ ಅಧ್ಯಕ್ಷರು, ನಗರದ ವಿವಿಧ ನ್ಯಾಯಾಧೀಶರುಗಳು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಹಾಗೂ ವಕೀಲರು ಭಾಗವಹಿಸಿದ್ದರು.
ಯೋಗ ತರಬೇತುದಾರರಾಗಿ ವಕೀಲ ಸಂಜೀವ್ ಕುಮಾರ್ ಹಡಗಲಿ ಅವರು ಭಾಗವಹಿಸಿ ಯೋಗಾಭ್ಯಾಸ ನಡೆಸಿಕೊಟ್ಟರು. ನ್ಯಾಯಾಂಗ ಕುಟುಂಬದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Post a Comment