ಹುಬ್ಬಳ್ಳಿ, ಜೂ.27: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿರುವ ಮಾಜಿ ಮುಖ್ಯಮಂತ್ರಿ Basavaraj Bommai, ತಕ್ಷಣವೇ ಜಿಲ್ಲಾಧಿಕಾರಿಗಳ ಸಭೆ ಕರೆದು ರಾಜ್ಯವನ್ನು 'ಬರಗಾಲ ಪೀಡಿತ' ಎಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ರಾಜ್ಯದಲ್ಲಿ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆ ಕಾರ್ಯ ನಡೆದಿದ್ದು, ಮಳೆ ವಿಳಂಬವಾದರೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹೇಳಿದರು. ಜೊತೆಗೆ, ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿ ಸರ್ಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದರಿಂದ ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ನೆರವು ಪಡೆಯಲು ಅನುಕೂಲವಾಗಲಿದೆ ಎಂದು ಅವರು ಸಲಹೆ ನೀಡಿದರು.
ರಾಜ್ಯದ ಕೆರೆ-ಕಟ್ಟೆಗಳು ಹಾಗೂ ಜಲಾಶಯಗಳು ಬತ್ತುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿಯೂ ಸಮರ್ಪಕ ಕೃಷಿ ಸಚಿವರ ನೇಮಕವಾಗದಿರುವುದು ದುರದೃಷ್ಟಕರ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರವು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
Post a Comment