ಧಾರವಾಡ, ಜು.12: ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಆಗಸ್ಟ್ ಅಂತ್ಯದೊಳಗೆ ಜಿಲ್ಲೆಯ 126 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ದೇವಿದಾಸ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ ಹೆಬ್ಬಳ್ಳಿ ಹಾಗೂ ಶಿವಳ್ಳಿ ಗ್ರಾಮಗಳಲ್ಲಿನ ನೀರು ಪಂಪ್ ಘಟಕಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದೊಳಗೆ ಮೊದಲ ಹಂತದಲ್ಲಿ 24 ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆಯನ್ನು ಆರಂಭಿಸಬೇಕು ಎಂದು ಸೂಚಿಸಿದರು. ನಂತರ ಹಂತಹಂತವಾಗಿ ಉಳಿದ ಗ್ರಾಮಗಳಿಗೂ ನೀರು ಪೂರೈಸುವ ಕಾರ್ಯವನ್ನು ಪೂರ್ಣಗೊಳಿಸಿ, ಆಗಸ್ಟ್ ಅಂತ್ಯದೊಳಗೆ ಒಟ್ಟು 126 ಗ್ರಾಮಗಳಿಗೆ ಯೋಜನೆಯ ಪ್ರಯೋಜನ ತಲುಪುವಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಇಂಟೇಕ್ ವೆಲ್ನಿಂದ ಜಲಶುದ್ಧೀಕರಣ ಘಟಕದವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯದ ಪ್ರಗತಿ, ಪೈಪ್ಲೈನ್ ಸಂಪರ್ಕ, ಪಂಪಿಂಗ್ ವ್ಯವಸ್ಥೆ ಹಾಗೂ ತಾಂತ್ರಿಕ ಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಗಳಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ನಿರಂತರ ಹಾಗೂ ಸುರಕ್ಷಿತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿ.ಪಂ. ಸಿಇಒ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
إرسال تعليق