ನವದೆಹಲಿ, ಜೂ.29: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಗ್ರಹಿಸಿದ್ದ ದೇಣಿಗೆ ನಿಧಿಯಲ್ಲಿ ದುರ್ಬಳಕೆ ನಡೆದಿದೆ ಎಂಬ ಆರೋಪದ ಕುರಿತು ನ್ಯಾಯಸಮ್ಮತ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರಿದ್ದ ನ್ಯಾಯಪೀಠವು ಅರ್ಜಿಯನ್ನು ಪರಿಗಣಿಸಿದ ವೇಳೆ, ತಕ್ಷಣವೇ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.
ಅರ್ಜಿದಾರರ ಪರ ವಕೀಲರು ತುರ್ತು ವಿಚಾರಣೆಗೆ ಮನವಿ ಸಲ್ಲಿಸಿದಾಗ, ನ್ಯಾಯಪೀಠವು, "ಈಗೇನು ಆಕಾಶ ಕಳಚಿ ಬೀಳುವುದಿಲ್ಲ... ಇದರಲ್ಲಿ ಅಂತಹ ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿತು.
ಇದೇ ವೇಳೆ, ಬೇಸಿಗೆ ರಜೆಗಳ ನಂತರ ಪ್ರಕರಣವನ್ನು ನಿಯಮಿತವಾಗಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.
ರಾಮಮಂದಿರ ನಿಧಿ ದುರ್ಬಳಕೆಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದ್ದು, ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
Post a Comment