ಧಾರವಾಡ: ಧಾರವಾಡ ಬೈಪಾಸ್ ರಸ್ತೆಯ ಹಳಿಯಾಳ ರಸ್ತೆ ಸಮೀಪದ ನಾಗರ ಹಾವಿನಂಗಿ ಪ್ರದೇಶದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡು ಮೂಲದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ವೇಗವಾಗಿ ಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣೆ ಕಾರ್ಯಾಚರಣೆ ನಡೆಸಿ ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಧಾರವಾಡ ಬೈಪಾಸ್ನಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ಸವಾರರು ವೇಗ ಮಿತಿ ಪಾಲಿಸಿ ಎಚ್ಚರಿಕೆಯಿಂದ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Post a Comment