ಬೆಂಗಳೂರು: ಕಾಂಗ್ರೆಸ್ ಗೂಂಡಾಗಿರಿ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ
ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದು ಹಲ್ಲೆಗೆ ಯತ್ನಿಸಿರುವ ಘಟನೆ ಖಂಡಿಸಿ, ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಎದುರು ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಾಯಕರು, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿಗೆ ಉತ್ತರ ಹಿಂಸೆ ಮತ್ತು ಗೂಂಡಾಗಿರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಕಾರ್ಯಕರ್ತರ ಹಿಂಸಾತ್ಮಕ ನಡೆ ಬಗ್ಗೆ ಮೌನ ವಹಿಸಿರುವುದು ಖಂಡನೀಯ ಎಂದು ಆರೋಪಿಸಿದರು.
ಕೆಪಿಸಿಸಿ ಕಚೇರಿ ಎದುರು ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಬಿಜೆಪಿ ಮುಖಂಡರು, ರಾಜ್ಯದಲ್ಲಿ ಕಾನೂನಿನ ಆಳ್ವಿಕೆ ಇದೆಯೇ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿಗೆ ಸರ್ಕಾರವೇ ರಕ್ಷಣೆ ನೀಡುತ್ತಿದೆಯೇ ಎಂಬ ಪ್ರಶ್ನೆಯನ್ನು ಸರ್ಕಾರದ ಮುಂದೆ ಇಟ್ಟರು.
"ಒಬ್ಬ ಜನಪ್ರತಿನಿಧಿಯ ಮೇಲೆಯೇ ಇಂತಹ ದಾಳಿಗೆ ಯತ್ನವಾದರೆ, ಸಾಮಾನ್ಯ ನಾಗರಿಕರ ಭದ್ರತೆ ಹೇಗಿರಬಹುದು ಎಂಬ ಆತಂಕ ಸಹಜ. ಬಿಜೆಪಿ ಯಾವುದೇ ಬೆದರಿಕೆ, ಹಿಂಸೆ ಅಥವಾ ಗೂಂಡಾಗಿರಿಗೆ ಮಣಿಯುವುದಿಲ್ಲ. ಪ್ರಜಾಪ್ರಭುತ್ವ, ಕಾನೂನು ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ನಮ್ಮ ಹೋರಾಟ ಇನ್ನಷ್ಟು ದೃಢವಾಗಿ ಮುಂದುವರಿಯಲಿದೆ" ಎಂದು ಬಿಜೆಪಿ ನಾಯಕರು ತಿಳಿಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಶಾಸಕರಾದ ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ಸುರೇಶ್ ಕುಮಾರ್, ಜನಾರ್ದನ ರೆಡ್ಡಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
إرسال تعليق