ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಹೊಸ ಮಹಾನಗರ ಪಾಲಿಕೆ ರಚಿಸುವ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಬೇಕೆಂಬ ಬೇಡಿಕೆ ಮತ್ತೊಮ್ಮೆ ತೀವ್ರಗೊಂಡಿದೆ. ಈ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೋರಾಟಗಾರರು ನೀಡಿದ್ದ ಜುಲೈ 30ರ ಗಡುವು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಇದೀಗ ಮತ್ತೊಂದು ವಾರದ ಅಂತಿಮ ಗಡುವು ನೀಡಿ ಎಚ್ಚರಿಕೆ ನೀಡಿದ್ದಾರೆ.
ಹೋರಾಟಗಾರರ ಪ್ರಕಾರ, ಸರ್ಕಾರ ಈಗಾಗಲೇ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ತೀರ್ಮಾನ ಕೈಗೊಂಡಿದ್ದರೂ, ಅಂತಿಮ ಅಧಿಸೂಚನೆ ಇನ್ನೂ ಹೊರಬಿದ್ದಿಲ್ಲ. ಈ ವಿಳಂಬದಿಂದ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಒಂದು ವಾರದೊಳಗೆ ಅಧಿಸೂಚನೆ ಹೊರಡಿಸದಿದ್ದರೆ, ಧಾರವಾಡದಲ್ಲಿ ಬೃಹತ್ ಪ್ರತಿಭಟನೆ, ಜನಜಾಗೃತಿ ಅಭಿಯಾನ ಹಾಗೂ ವಿವಿಧ ಹಂತದ ಹೋರಾಟಗಳನ್ನು ಆರಂಭಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ನೀಡುವ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಸಮರ್ಪಕ ಆಡಳಿತ, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಮತ್ತು ಸ್ಥಳೀಯ ಸಮಸ್ಯೆಗಳ ತ್ವರಿತ ಪರಿಹಾರಕ್ಕಾಗಿ ಈ ನಿರ್ಧಾರ ಅಗತ್ಯ ಎಂದು ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.
Post a Comment