ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಮೇಲೆ ಕಾಮಗಾರಿ: ಸ್ಥಗಿತಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಭವಾನಿ ಶಂಕರ ಹಾಗೂ ಶ್ರೀ ನಾರಾಯಣ ದೇವಸ್ಥಾನದ ಪುಷ್ಕರಣಿ ಮೇಲೆ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ದೇವಸ್ಥಾನದ ಪುಷ್ಕರಣಿ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ದೇವಸ್ಥಾನದ ಪಾವಿತ್ರ್ಯ ಹಾಗೂ ಪುಷ್ಕರಣಿಯ ಮೂಲ ಸ್ವರೂಪಕ್ಕೆ ಧಕ್ಕೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪುಷ್ಕರಣಿ ಪ್ರದೇಶದಲ್ಲಿ ಅನಧಿಕೃತ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಈ ಕುರಿತು ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ, ನಿಯಮಬಾಹಿರ ಕಾಮಗಾರಿ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮುತಾಲಿಕ್ ಎಚ್ಚರಿಕೆ ನೀಡಿದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೇವಸ್ಥಾನದ ಪಾವಿತ್ರ್ಯ ಕಾಪಾಡುವುದು ಮತ್ತು ಪುಷ್ಕರಣಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
Post a Comment